ಬೈ ಪಾಸ್ ರಸ್ತೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಯನ್ನು ಚುರಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ
•ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹಾಗೂ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಭಾಗಿ
•ವಿಧಾನಸೌಧದಲ್ಲಿ ಹುಬ್ಬಳ್ಳಿ ಧಾರವಾಡ ಭಾಗದ ರಸ್ತೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು ಜುಲೈ 24: ಹುಬ್ಬಳ್ಳಿ ಧಾರವಾಡ ಭಾಗದಲ್ಲಿನ ರಸ್ತೆಗಳು, ಬೈಪಾಸ್ ರಸ್ತೆಗಳು ಹಾಗೂ ಹೆದ್ದಾರಿಗಳ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಇಂದು ಬೆಂಗಳೂರಿನ ವಿಧಾನಸೌಧಧಲ್ಲಿ ಹುಬ್ಬಳ್ಳಿ ಧಾರವಾಡ ಭಾಗದ ಕೆ.ಆರ್.ಡಿ.ಸಿ.ಎಲ್, ರಾಷ್ಟ್ರೀಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಅಡಿ ಅನುಷ್ಠಾನಗೊಳಿಸುತ್ತಿರುವ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಗದೀಶ ಶೆಟ್ಟರ ಮತ್ತು ಉಪಮುಖ್ಯಮಂತ್ರಿ ಶ್ರೀ ಗೋವಿಂದ ಕಾರಜೋಳ ಅವರುಗಳು ಭಾಗವಹಿಸಿದ್ದರು.
ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆಯನ್ನು ಆರು ಲೈನ್ ಗೆ ಉನ್ನತಿಕರಿಸುವ ಕಾಮಗಾರಿ ಇನ್ನು ಪ್ರಾರಂಭವಾಗದೇ ಇರುವುದಕ್ಕೆ ಕಾರಣಗಳೇನು ಎನ್ನುವುದನ್ನ ಪ್ರಶ್ನಿಸಿದರು. ಈ ಹಿಂದೆ ನಡೆದ ಸಭೆಯಲ್ಲಿ ಅಗತ್ಯವಿರುವ ಅನುಮತಿಗಳನ್ನು ಪಡೆದುಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೆ, ಇದುವರೆಗೂ ಕಾಮಗಾರಿ ಪ್ರಾರಂಭಿಸದೇ ಇರುವುದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕಾಮಗಾರಿಯನ್ನು ಈ ಕೂಡಲೇ ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಗದೀಶ ಶೆಟ್ಟರ ಮಾತನಾಡಿ, ಈ ಕಾಮಾಗಾರಿಯನ್ನು ಪ್ರಾರಂಭಿಸುವಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಈಗಾಗಲೇ ಖೇಣಿ ಅವರೊಂದಿಗೆ ಮಾತನಾಡಿ ಕಾಮಗಾರಿ ಪ್ರಾರಂಭದ ಬಗ್ಗೆ ಇದ್ದ ಗೊಂದಲಗಳನ್ನು ಸರಿಪಡಿಸಿಕೊಳ್ಳಲಾಗಿದೆ. ಆದರೆ, ಇನ್ನು ಕಾಮಗಾರಿ ಪ್ರಾರಂಭ ಮಾಡದೇ ಇರುವುದು ಹಾಗೂ ಪ್ರಾರಂಭಕ್ಕೆ ಆಗುತ್ತಿರುವ ವಿಳಂಬದಿಂದಾಗಿ ಜನರಿಗೆ ಬಹಳಷ್ಟು ತೊಂದರೆ ಆಗುತ್ತಿದೆ. ಈ ಕಾಮಗಾರಿಯ ಪ್ರಾರಂಭಕ್ಕೆ ಇರುವ ತೊಡಕುಗಳನ್ನು ನಿವಾರಿಸಿಕೊಳ್ಳಲು ರಾಜ್ಯ ಹಾಗೂ ಕೇಂದ್ರ ಸರಕಾರದ ಅನುಮತಿಗಳನ್ನು ಕೊಡಿಸುವ ಭರವಸೆಯನ್ನು ನೀಡಿದರು. ಅಲ್ಲದೆ, ಸಮಸ್ಯೆ ಇಲ್ಲದ ಹಾಗೂ ತುರ್ತು ಕಾಮಗಾರಿಗಳನ್ನು ಪ್ರಾರಂಭಿಸಲು ಸಾಧ್ಯವಿರುವ ಕಡೆ ಕಾಮಗಾರಿಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಇದೇ ರೀತಿ ನವಲಗುಂದ ಹಾಗೂ ನರಗುಂದ ಬೈಪಾಸ್ ರಸ್ತೆಗಳ ಸಂಬಂಧಿತ ಕೆಲಸಗಳನ್ನು ಚುರುಕುಗೊಳಿಸುವಂತೆ ಸೂಚನೆ ನೀಡಲಾಯಿತು. ಅಲ್ಲದೆ, ಮುಂದಿನ ವಾರ ಖೇಣೀ ಅವರೊಂದಿಗೆ ಸಭೆಯನ್ನು ನಡೆಸುವಂತೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ತಿಳಿಸಲಾಯಿತು. ಮುಂದಿನ ಶುಕ್ರವಾರ ಈ ಬಗ್ಗೆ ಆಗಿರುವ ಪ್ರಗತಿಯನ್ನು ತಿಳಿಯುವ ನಿಟ್ಟಿನಲ್ಲಿ ವಿಡಿಯೋ ಕಾನ್ಫರೆನ್ಸ್ ಮಾಡಲು ನಿರ್ಧರಿಸಲಾಯಿತು.
ಸಭೆಯಲ್ಲಿ ಶಾಸಕರಾದ ಅರವಿಂದ್ ಬೆಲ್ಲದ್, ಶಂಕರ್ ಪಾಟೀಲ್ ಮುನೇನಕೊಪ್ಪ, ಲೋಕೋಪಯೋಗಿ ಇಲಾಖೆ, ಕೆ ಆರ್ ಡಿ ಸಿ ಎಲ್ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.