ಜಿಲ್ಲೆಯ ಯಾರಾದರು ಒಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ನಾವು ಈಗಾಗಲೇ ಮನವಿ ಸಲ್ಲಿಸಿದ್ದೇವೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಕುರಿತು ಚರ್ಚೆ ಮಾಡಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಹೇಳಿದರು.
ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿ ಕುರಿತು ನಾನು ಹಾಗೂ ಜಿಲ್ಲೆಯ ಶಾಸಕರು ಬೆಂಗಳೂರಿನಲ್ಲಿ ಹಾಗೂ ಶಿರಮಗೊಂಡನಹಳ್ಳಿಯ ಎಸ್.ಎ.ರವೀಂದ್ರನಾಥ್ ಮನೆಯಲ್ಲಿ ಸಭೆ ಮಾಡಿದ್ದೀವಿ. ಜಿಲ್ಲೆಗೊಂದು ಸಚಿವ ಸ್ಥಾನ ನೀಡಬೇಕು, ದಾವಣಗೆರೆ ಜಿಲ್ಲೆ ಸಚಿವ ಸ್ಥಾನ ವಂಚಿತವಾಗಿದ್ದು ಸಚಿವ ಸ್ಥಾನ ನೀಡುವಂತೆ ಸಭೆ ಮಾಡಿದ್ದೇವೆ ಎಂದರು.
ನನಗೆ ಸಚಿವ ಸ್ಥಾನ ನೀಡಿ ಎಂದು ಕೇಳಿಲ್ಲಾ, ಜಿಲ್ಲೆಯಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಿ ಎಂದು ಕೇಳಿದ್ದೇವೆ. ಭೈರತಿ ಬಸವರಾಜ್ ಕೋವಿಡ್ ನಿಯಂತ್ರಿಸುವುದರ ಜೊತೆಗೆ ಅಧಿಕಾರಿಗಳೊಂದಿಗೆ ಸಾಕಷ್ಟು ಸಭೆ ಮಾಡಿದ್ದಾರೆ. ಅವರನ್ನು ಬದಲಾವಣೆ ಮಾಡಿ ಎಂದು ಎಲ್ಲಿಯೂ ಹೇಳಿಲ್ಲಾ ಎಂದಿದ್ದಾರೆ.
ಸಿಎಂ ಭೇಟಿ ಮಾಡಿದ್ದೂ ಕೂಡ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇವೆ. ಈಗಲೂ ಕೂಡ ನಾವು ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಎಂದು ಹೇಳಿಲ್ಲಾ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ.